ಹೊನ್ನಾವರ; ಭಾರತದ ಪ್ರತಿಷ್ಠಿತ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಪ್ರಮುಖವಾಗಿರುವ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯ ಹಾಗೂ ಡಾ. ಡಿ ವಿರೇಂದ್ರ ಹೆಗ್ಗಡೆವರ ಕುರಿತು ಆಧಾರರಹಿತ ಆರೋಪದ ಕುರಿತು ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಗಸ್ಟ 21 ರ ಗುರುವಾರ 4 ಗಂಟೆಗೆ ಹೊನ್ನಾವರದ ಎಂ.ಪಿ.ಇ. ಸೊಸೈಟಿಯ ಎಸ್. ಡಿ.ಎಂ.ಪದವಿ ಕಾಲೇಜಿನ ಆರ್.ಎಸ್. ಹೆಗಡೆ ಸಭಾಭವನದಲ್ಲಿ ಸಾರ್ವಜನಿಕರ ಸಭೆ ಕರೆಯಲಾಗಿದೆ.

ಹಲವು ದಶಕಗಳಿಂದ ಸಮಾಜಮುಖಿ ಕಾರ್ಯಗಳ ಮೂಲಕ ಧಾರ್ಮಿಕ ಶ್ರದ್ಧೆಯ ಸಂಕೇತವಾಗಿ ಗುರುತಿಸಿಕೊಂಡಿದೆ. ಧಾರ್ಮಿಕ ಕಾರ್ಯಕ್ರಮಗಳು, ಕ್ಷೇತ್ರಗಳ ಜೀರ್ಣೋದ್ಧಾರ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಿಂದ ಧರ್ಮಸ್ಥಳವು ಕೋಟ್ಯಂತರ ಭಕ್ತರ ಭರವಸೆಯ ಕೇಂದ್ರವಾಗಿದೆ. ಇತ್ತೀಚಿನ ದಿನಗಳಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ಹಾಗೂ ಕೆಲವು ವಿರೋಧಿ ಶಕ್ತಿಗಳು ಸಂಘಟಿತವಾಗಿ ಶ್ರೀ ಕ್ಷೇತ್ರದ ಬಗ್ಗೆ ಮತ್ತು ಪೂಜ್ಯ ಖಾವಂದರ ಕುಟುಂಬದ ಕುರಿತು ಅಪಪ್ರಚಾರ ನಡೆಸುತ್ತಿದ್ದು ಧರ್ಮಸ್ಥಳದ ಗೌರವ ಹಾಗೂ ಘನತೆಗೆ ಧಕ್ಕೆ ತರುವಂತೆ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದು ಕೋಟ್ಯಂತರ ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡುವುದರೊಂದಿಗೆ ಸಮಾಜದ ಶಾಂತಿ ಸೌಹಾರ್ದತೆಗೂ ಧಕ್ಕೆ ತರುತ್ತಿದೆ.
ರಾಜ್ಯ ಸರ್ಕಾರವು ಈಗಾಗಲೇ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಎಸ್.ಐ.ಟಿ. ತನಿಖೆ ನಡೆಸುತ್ತಿರುವ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿ ಈ ಷಡ್ಯಂತ್ರದ ಪಿತೂರಿ ಮಾಡಿರುವ ಸಮಾಜಘಾತುಕರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುವ ನಿಟ್ಟಿನಲ್ಲಿ ಚರ್ಚಿಸುವ ಸಲುವಾಗಿ ಸಭೆ ಕರೆಯಲಾಗಿದೆ.ಈ ಕ್ಷೇತ್ರ ಧರ್ಮಸ್ಥಳದ ಭಕ್ತರು, ಪೂಜ್ಯ ಡಾ. ವೀರೇಂದ್ರ ಹೆಗ್ಗಡೆ ಅವರ ಅಭಿಮಾನಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಗಣ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು ಚರ್ಚೆಯಲ್ಲಿ ಪಾಲ್ಗೊಳ್ಳಬೇಕಾಗಿ ಎಂ.ಪಿ.ಇ ಸೊಸೈಟಿ ಅಧ್ಯಕ್ಷರಾದ ಕೃಷ್ಣಮೂರ್ತಿ ಭಟ್ ಶಿವಾನಿ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

More Stories
ಹೊನ್ನಾವರದಲ್ಲಿ ಸಂಭ್ರಮದ “ಪತ್ರಿಕಾ ದಿನಾಚರಣೆ”: ಸಾಧಕರಿಗೆ ಸನ್ಮಾನ; ಮಾಧ್ಯಮದ ಸವಾಲುಗಳ ಕುರಿತು ಗಂಭೀರ ಚಿಂತನೆ
ಹೊನ್ನಾವರದ ಯುವಕನ ಜಾಗತಿಕ ಸಾಧನೆ: ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಮಿಂಚಿ NVIDIA ಕಂಪನಿಯಲ್ಲಿ ವಾರ್ಷಿಕ ₹2.60 ಕೋಟಿ ಪ್ಯಾಕೇಜ್ ಪಡೆದ ಪೃಥ್ವಿರಾಜ್!
ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿ ಸಿಬ್ಬಂದಿ ಕೊರತೆ: ಸುರಕ್ಷತೆ ಬಗ್ಗೆ ದೇವರಾಜ ಅರಸು ವಿಚಾರ ವೇದಿಕೆ ತೀವ್ರ ಕಳವಳ