March 6, 2026

ಕಾಂತಾರ ನಟಿಯಿಂದ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಭಟ್ಕಳ: ಕಾಂತಾರ ಚಾಪ್ಟರ್–1 ಸಿನಿಮಾದಲ್ಲಿ ನಟಿಸಿ ಸಿನಿರಸಿಕರ ಗಮನ ಸೆಳೆದ ನಟಿ ಆಯಿರಾ ಕೃಷ್ಣ ಅವರು ತಮ್ಮ ಹುಟ್ಟೂರಾದ ಭಟ್ಕಳ ತಾಲೂಕಿನ ಮೂಡಭಟ್ಕಳ ಹಾಗೂ ಮುಟ್ಟಳ್ಳಿ ಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿದರು.


ಮೂಡಭಟ್ಕಳದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಮುಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿದ ಅವರು ತಮ್ಮ ಆಹಾರ ಇಂಡಿಯಾ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ಬ್ಯಾಗ್, ನೋಟ್ ಪುಸ್ತಕಗಳು ಹಾಗೂ ಜ್ಯಾಮಿಟ್ರಿ ಬಾಕ್ಸ್‌ಗಳನ್ನು ವಿತರಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಈ ವೇಳೆ ಮಾತನಾಡಿದ ಅವರು, ಆಹಾರ ಇಂಡಿಯಾ ಸಂಸ್ಥೆಗೆ ಈಗ ಐದು ವರ್ಷಗಳು ಪೂರ್ಣಗೊಂಡಿದ್ದು, ಕೋವಿಡ್ ಸಂದರ್ಭ ಜನರಿಗೆ ನೆರವು ನೀಡುವ ಉದ್ದೇಶದಿಂದ ಸಂಸ್ಥೆಯನ್ನು ಆರಂಭಿಸಲಾಗಿತ್ತು ಎಂದರು. ಆ ಸಮಯದಲ್ಲಿ ತಾಲೂಕು ಸೇರಿದಂತೆ ಒಟ್ಟು ೧೧ ಜಿಲ್ಲೆಗಳಲ್ಲಿ ಫುಡ್ ಕಿಟ್‌ಗಳನ್ನು ವಿತರಿಸಲಾಗಿತ್ತು ಎಂದು ಹೇಳಿದರು.
ರಾಜ್ಯದ ವಿವಿಧ ಭಾಗಗಳಷ್ಟೇ ಅಲ್ಲದೆ ತಮಿಳುನಾಡಿನ ಬಡ ಕುಟುಂಬಗಳು ವಾಸಿಸುವ ಪ್ರದೇಶಗಳಲ್ಲಿನ ಶಾಲೆಗಳನ್ನು ಗುರುತಿಸಿ, ಅಲ್ಲಿ ಶಿಕ್ಷಣಕ್ಕೆ ಅಗತ್ಯವಿರುವ ಪರಿಕರಗಳನ್ನು ಒದಗಿಸುವ ಕಾರ್ಯವೂ ನಡೆಸಲಾಗಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ತಾಲೂಕಿನ ಅಂತರ ಪ್ರದೇಶಗಳ ಸರ್ಕಾರಿ ಶಾಲೆಗಳನ್ನು ಗುರುತಿಸಿ, ಅಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯ ನೀಡುವ ಉದ್ದೇಶ ಹೊಂದಿದ್ದೇವೆ ಎಂದು ಅವರು ಹೇಳಿದರು.


ಈ ಸಂದರ್ಭದಲ್ಲಿ ಮೂಡಭಟ್ಕಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವೆಂಕಟೇಶ ನಾಯ್ಕ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯ್ಕ, ಮುಖ್ಯ ಶಿಕ್ಷಕಿ ಗೀತಾ ಶಿರೂರು, ಭಾಸ್ಕರ ನಾಯ್ಕ, ಮಂಜುನಾಥ ನಾಯ್ಕ, ಕೃಷ್ಣ ನಾಯ್ಕ ಕಾಟಿಮನೆ ಮತ್ತಿತರರು ಉಪಸ್ಥಿತರಿದ್ದರು.

About The Author

error: Content is protected !!