ಹೊನ್ನಾವರ: ಸೋತಾಗ ಕುಗ್ಗದೇ ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಮುನ್ನಡೆದರೆ ಪ್ರತಿಯೊಬ್ಬರೂ ಯಶಸ್ಸು ಸಾಧಿಸಬಹುದು ಎಂದು ಗ್ಲೋಬ್ ಟಿಕ್ ಫೊರ್ಚ್ಯನ್ ಇಂಡಸ್ಟ್ರಿಸ್ ಪ್ರೈ.ಲಿ. ಮ್ಯಾನೇಜಿಂಗ್ ಡೈರೆಕ್ಟರ್ ಗಣೇಶ ಹೆಗಡೆ ಹೇಳಿದರು.
ತಾಲೂಕಿನ ಅರೇಅಂಗಡಿಯ ಎಸ್.ಎಸ್.ಕೆ.ಪಿ ಜ್ಯೂನಿಯರ್ ಕಾಲೇಜಿನಲ್ಲಿ ಎಸ್.ಕೆ.ಪಿ ಪೂರ್ವ ವಿದ್ಯಾರ್ಥಿ ಬಳಗದ ವತಿಯಿಂದ ಆಯೋಜಿಸಲಾದ “ಸಾಂಸ್ಕೃತಿಕ ಸಂಭ್ರಮ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳು ಕೇವಲ ಪಾಠ್ಯ ವಿದ್ಯೆಯನ್ನು ನೀಡುವುದಲ್ಲದೆ, ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವ ಮೂಲಕ ಉತ್ತಮ ಪ್ರಜೆಗಳನ್ನು ರೂಪಿಸುತ್ತವೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಚಾರ್ಯ ವಿ.ಎನ್. ಭಟ್ ಮಾತನಾಡಿ, ಇಂದಿನ ಯುಗದಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣ ಅತ್ಯಗತ್ಯವಾಗಿದೆ ಎಂದರು. ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ವ್ಯಾಮೋಹ ಶಿಕ್ಷಣ ಮತ್ತು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿ, ಪಾಲಕರು ಮಕ್ಕಳ ಮೊಬೈಲ್ ಬಳಕೆಯ ಮೇಲೆ ನಿಗಾ ವಹಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಬೆಂಗಳೂರಿನ ಸರ್ಕಾರಿ ಹೊಮಿಯೊಪಥಿಕ್ ಕಾಲೇಜಿನ ಉಪನ್ಯಾಸಕರಾದ ಡಾ. ಶ್ರೀಪಾದ ಹೆಗಡೆ ಹಾಗೂ ಇತಿಹಾಸ ವಿಭಾಗದ ನಿವೃತ್ತ ಉಪನ್ಯಾಸಕ ಎಸ್.ಎಸ್. ಶಿವಪ್ಪ ಅವರನ್ನು ಸನ್ಮಾನಿಸಲಾಯಿತು. ಕ್ರೀಡೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಪೂರ್ವ ವಿದ್ಯಾರ್ಥಿ ಬಳಗದ ಕಾರ್ಯದರ್ಶಿ ಗೋಪಾಲಕೃಷ್ಣ ಹೆಗಡೆ ಹುಕ್ಲಮಕ್ಕಿ ಹಾಗೂ ನಿವೃತ್ತ ಉಪನ್ಯಾಸಕ ಕೆ.ಎಸ್. ಹೆಗಡೆ ಸಂಘಟನೆಯ ಕಾರ್ಯವನ್ನು ಪ್ರಶಂಸಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಮವೇದದ ಹಿರಿಯ ವಿದ್ವಾಂಸ ಸುಬ್ರಹ್ಮಣ್ಯ ಭಟ್ ವಹಿಸಿ ಮಾತನಾಡಿ, ಸಮಾಜಮುಖಿ ಕಾರ್ಯಗಳ ಮೂಲಕ ಸಮಾಜಕ್ಕೆ ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು. ಸಂಸ್ಥೆಯ ಪೂರ್ವ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆ ಎಂದು ತಿಳಿಸಿ, ಸಂಘ ಇನ್ನಷ್ಟು ಬೆಳೆಯಲಿ ಎಂದು ಶುಭಹಾರೈಸಿದರು.
ಸಂಘದ ಅಧ್ಯಕ್ಷ ಜಿ.ಆರ್. ನಾಯ್ಕ ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು. ಉಪನ್ಯಾಸಕ ಪ್ರಶಾಂತ ಹೆಗಡೆ ಮೂಡಲಮನೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಸಂದೀಪ ಭಟ್ ಕಾರ್ಯಕ್ರಮ ನಿರ್ವಹಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಪೂರ್ವ ವಿದ್ಯಾರ್ಥಿಗಳು ಹಾಗೂ ಅತಿಥಿ ಕಲಾವಿದರಿಂದ “ವಾಲಿಮೋಕ್ಷ” ಯಕ್ಷಗಾನ ಪ್ರದರ್ಶನ ನಡೆಯಿತು.

More Stories
ಕೌಶಲ್ಯಾಭಿವೃದ್ಧಿಯಿಂದ ಉದ್ಯೋಗ ಗಳಿಕೆ ಸಾಧ್ಯ– ವಿನಾಯಕ ನೀಲ್ಕೋಡ್
ಶ್ರೀನಿಧಿ ಸೇವಾ ವಾಹಿನಿ ತಾಲೂಕ ಗಾಣಿಗ ಸಂಘ 25 ರ ಸಂಭ್ರಮ; ಸಾಧಕರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ
ಅಪ್ಸರಕೊಂಡದ ಕಡಲತೀರದಲ್ಲಿ ಶನಿವಾರ ರಾತ್ರಿ ಸಿಡಿಲು ಬಡಿದು ಓರ್ವ ಮೃತ ಪಟ್ಟು ಇರ್ವರಿಗೆ ಗಾಯ ಸಂಭವಿಸಿದ ಘಟನೆ ನಡೆದಿದೆ.