May 24, 2026

ಯಲಿಹಡಲಗಿ-ಅಡಹಳ್ಳಟ್ಟಿ ರಸ್ತೆ ಸಂಪೂರ್ಣ ಹದಗೆಟ್ಟು ಜನರ ಪರದಾಟ ಗುಂಡಿಮಯ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಸಂಚರಿಸುವ ವಾಹನ ಸವಾರರು

ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಲಿಹಡಲಗಿ ಗ್ರಾಮದಿಂದ ಅಡಹಳ್ಳಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ರಸ್ತೆಯುದ್ದಕ್ಕೂ ಬೃಹತ್ ಗಾತ್ರದ ತೆಗ್ಗು-ಗುಂಡಿಗಳು ಉಂಟಾಗಿರುವುದರಿAದ ಸಂಚಾರ ದುಸ್ತರವಾಗಿದ್ದು, ದಿನನಿತ್ಯ ಅಪಘಾತಗಳ ಭೀತಿ ಕಾಡುತ್ತಿದೆ.

ಗ್ರಾಮೀಣ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಈ ಮಾರ್ಗದಲ್ಲಿ ಬೈಕ್ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವAತಾಗಿದೆ. ಮಳೆ ನೀರು ಗುಂಡಿಗಳಲ್ಲಿ ನಿಂತು ರಸ್ತೆ ಇನ್ನಷ್ಟು ಹಾಳಾಗಿದ್ದು, ವಾಹನಗಳು ಜಾರಿಬೀಳುವ ಘಟನೆಗಳು ಸಾಮಾನ್ಯವಾಗಿವೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ. ಚುನಾವಣೆ ಸಮಯದಲ್ಲಿ ಅಭಿವೃದ್ಧಿಯ ಭರವಸೆ ನೀಡಿದ ಜನಪ್ರತಿನಿಧಿಗಳು ಇದೀಗ ಜನರ ಸಮಸ್ಯೆಗಳತ್ತ ತಿರುಗಿಯೂ ನೋಡುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಡಹಳ್ಳಟ್ಟಿ ಗ್ರಾಮಸ್ಥರು ಹಾಗೂ ಪಂಚಾಯಿತಿ ಸದಸ್ಯರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳ ಮೂಲಕ ರಸ್ತೆ ದುಸ್ಥಿತಿಯನ್ನು ಬಿಂಬಿಸಿ ಅಧಿಕಾರಿಗಳ ಗಮನ ಸೆಳೆಯಲು ಯತ್ನಿಸುತ್ತಿದ್ದಾರೆ.

ಈ ಕುರಿತು ಮಾತನಾಡಿದ ಸಾಮಾಜಿಕ ಹೋರಾಟಗಾರ ಪ್ರವೀಣ್ ನಾಯಕ್, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಅಧಿಕಾರಿಗಳು ಕುರುಡರಂತೆ ವರ್ತಿಸುತ್ತಿದ್ದಾರೆ. ಕನಿಷ್ಠ ರಸ್ತೆ ಗುಂಡಿಗಳನ್ನು ಮುಚ್ಚುವ ಪ್ಯಾಚ್ ವರ್ಕ್ ಕೆಲಸವನ್ನೂ ಲೋಕೋಪಯೋಗಿ ಇಲಾಖೆ ಕೈಗೊಂಡಿಲ್ಲ. ಸಾರ್ವಜನಿಕರು ಶಾಪ ಹಾಕುತ್ತಲೇ ಈ ರಸ್ತೆಯಲ್ಲಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿಕಾರಿದರು.

ಇನ್ನೊಂದೆಡೆ, ಅಡಹಳ್ಳಟ್ಟಿ ಗ್ರಾಮದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣವಾಗಬೇಕೆಂಬುದು ಗ್ರಾಮಸ್ಥರ ದಶಕಗಳ ಬೇಡಿಕೆಯಾಗಿದೆ. ಆದರೆ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ಕುಂಠಿತಗೊAಡಿದ್ದು, ಜನರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಹಲವು ಬಾರಿ ವರದಿಯಾದರೂ ಸಂಬAಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಅಸಮಾಧಾನವೂ ವ್ಯಕ್ತವಾಗಿದೆ.

ತಕ್ಷಣವೇ ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು. ಜೊತೆಗೆ ಅಡಹಳ್ಳಟ್ಟಿ ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸಮಸ್ಯೆ ಬಗೆಹರಿಯದಿದ್ದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆದು ಉಗ್ರ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ವರದಿ: ಮಹೇಶ್ ಶರ್ಮಾ, ಬೆಳಗಾವಿ

About The Author

error: Content is protected !!