ಭಟ್ಕಳ: ನಿರಂತರ ಅಪರಾಧ ಚಟುವಟಿಕೆಗಳ ಹಿನ್ನೆಲೆ ಹೊಂದಿರುವ ಇಲ್ಲಿನ ಮೂಸಾನಗರ ನಿವಾಸಿ ಇಸ್ಮಾಯಿಲ್ ಹವ್ವಾ (46) ಅವರನ್ನು ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.


7 ಪ್ರಕರಣಗಳ ಹಿನ್ನೆಲೆ:
ಆರೋಪಿ ಇಸ್ಮಾಯಿಲ್ ಹವ್ವಾ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯಡಿ 2020ರಿಂದ 2025ರ ಅವಧಿಯಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಈಗಾಗಲೇ ಎರಡು ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು, ಇನ್ನುಳಿದ ಐದು ಪ್ರಕರಣಗಳು ಸದ್ಯ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿವೆ.
ಗಡಿಪಾರು ಆದೇಶಕ್ಕೆ ಕಾರಣ:
ಆರೋಪಿಯು ನಿರಂತರವಾಗಿ ಇಂತಹದೇ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಸಾರ್ವಜನಿಕ ಶಾಂತಿ, ಕೋಮು ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು ಪೊಲೀಸ್ ಇಲಾಖೆ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಭಟ್ಕಳ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಆರೋಪಿಯ ವಿರುದ್ಧ ಗಡಿಪಾರು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸೂಕ್ತ ಪ್ರಸ್ತಾವನೆ ಸಲ್ಲಿಸಿದ್ದರು.

ಕಾನೂನು ಕ್ರಮ ಮತ್ತು ಜಾರಿ:
ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿಯೋಜನೆ ಮತ್ತು ಪ್ರತಿವಾದಿ ಪರ ವಾದ-ಪ್ರತಿವಾದಗಳನ್ನು ಆಲಿಸಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 55(ಎ) ಮತ್ತು 55(ಬಿ) ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.
ಈ ಆದೇಶದನ್ವಯ ಇಸ್ಮಾಯಿಲ್ ಹವ್ವಾ ಅವರನ್ನು ಉತ್ತರ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಗೆ ಆರು ತಿಂಗಳ ಅವಧಿಗೆ ಗಡಿಪಾರು ಮಾಡಲಾಗಿದೆ. ಭಟ್ಕಳ ನಗರ ಠಾಣೆಯ ಪೊಲೀಸರು ಆರೋಪಿಯನ್ನು ರಾಯಚೂರು ಗ್ರಾಮೀಣ ಠಾಣೆಯ ಅಧಿಕಾರಿಗಳ ಮುಂದೆ ಹಾಜರುಪಡಿಸಿ, ಗಡಿಪಾರು ಆದೇಶವನ್ನು ಅಧಿಕೃತವಾಗಿ ಜಾರಿಗೊಳಿಸಿದ್ದಾರೆ.

More Stories
ಪ್ರತಿಷ್ಠಿತ ‘ಡಿಜಿ-ಐಜಿಪಿ ಶ್ಲಾಘನಾ ಪದಕ’ ಗೌರವಕ್ಕೆ ಭಾಜನರಾದ ಭಟ್ಕಳದ ಹೆಡ್ ಕಾನ್ಸ್ಟೇಬಲ್ ದೀಪಕ್ ನಾಯ್ಕ
ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ಸಿಗೆ ಇಲಾಖೆಗಳ ಸಮನ್ವಯ ಅಗತ್ಯ: ಪ್ರಭಾರಿ ತಹಶೀಲ್ದಾರ್ ಪ್ರವೀಣ್ ಕಾರಂಡೆ
ಸಿಎ ಅಂತಿಮ ಪರೀಕ್ಷೆಯಲ್ಲಿ ಶ್ರೀ ಗುರು ಸುಧೀಂದ್ರ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಪ್ರಜ್ವಲ್ ಗೋಳಿ ಮತ್ತು ಪ್ರಸಾದ ಶೆಟ್ಟಿ ಸಾಧನೆ