June 26, 2026

ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಅಡಿಪಾಯ; ಶಾಸಕ ಮಂಕಾಳ ವೈದ್ಯ

ಭಟ್ಕಳ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯವು ಕೇವಲ ಒಂದು ಚುನಾವಣಾ ಪ್ರಕ್ರಿಯೆಯಲ್ಲ. ಅದು ಪ್ರತಿಯೊಬ್ಬ ನಾಗರಿಕನ ಪ್ರಜಾಪ್ರಭುತ್ವದ ಹಕ್ಕನ್ನು ಭದ್ರಪಡಿಸುವ ಅತ್ಯಂತ ಮಹತ್ವದ ಜವಾಬ್ದಾರಿಯಾಗಿದೆ ಎಂದು ಶಾಸಕ ಮಂಕಾಳ ವೈದ್ಯ ಹೇಳಿದರು.


ಪಟ್ಟಣದ ಅರ್ಬನ್ ಬ್ಯಾಂಕ್ ಸಭಾಂಗಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಎಸ್‌ಐಆರ್ (SIR) ಮತದಾರರ ಪಟ್ಟಿ ಜಾಗೃತಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಅರ್ಹ ಮತದಾರರು ಹೊರಗುಳಿಯಬಾರದು:
೨೦೨೨ ಹಾಗೂ ೨೦೨೫ರ ಮತದಾರರ ಪಟ್ಟಿಯನ್ನು ಆಧಾರವಾಗಿಟ್ಟುಕೊಂಡು ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡಿ ಅರ್ಹ ಮತದಾರರ ಹೆಸರುಗಳನ್ನು ಪರಿಶೀಲಿಸಬೇಕು. ಒಂದೊಮ್ಮೆ ಮತದಾರರ ಪಟ್ಟಿಯಿಂದ ಹೆಸರು ಕೈತಪ್ಪಿದರೆ ವ್ಯಕ್ತಿಯ ಪ್ರಜಾಪ್ರಭುತ್ವದ ಹಕ್ಕಿಗೆ ಧಕ್ಕೆಯಾಗುತ್ತದೆ ಮತ್ತು ಬಳಿಕ ಹೆಸರು ಸೇರ್ಪಡೆಗೆ ಅನಗತ್ಯ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಯಾವುದೇ ಅರ್ಹ ವ್ಯಕ್ತಿ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.


ಸಾಮಾನ್ಯ ಜನರು, ಬಡವರು, ಕಾರ್ಮಿಕರು ಹಾಗೂ ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ಅರ್ಹ ನಾಗರಿಕನೂ ಮತದಾರರಾಗುವಂತೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಈ ಕಾರ್ಯದಲ್ಲಿ ಬೂತ್ ಮಟ್ಟದ ಏಜೆಂಟರು (ಬಿಎಲ್‌ಎ) ಮಾತ್ರವಲ್ಲದೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.


ಶೀಘ್ರ ಪ್ರಕ್ರಿಯೆ ಪೂರ್ಣಗೊಳಿಸಲು ಸಲಹೆ
ಮುಂದಿನ ಡಿಸೆಂಬರ್ ಅಂತ್ಯದೊಳಗೆ ಗ್ರಾಮ ಪಂಚಾಯಿತಿ ಚುನಾವಣೆ ಹಾಗೂ ಮೇ ಅಂತ್ಯದೊಳಗೆ ತಾಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಲಭ್ಯವಿರುವ ಅವಧಿಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಸ್ಥಳಾಂತರ ಪ್ರಕ್ರಿಯೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಅವರು ಸಲಹೆ ನೀಡಿದರು.


ಮನೆಮನೆ ಭೇಟಿಗೆ ಭೀಮಣ್ಣ ನಾಯ್ಕ ಕರೆ:
ಜಿಲ್ಲಾ ಎಸ್‌ಐಆರ್ ಉಸ್ತುವಾರಿ ಹಾಗೂ ಶಿರಸಿ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, “ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಭಾಗವಹಿಸಬೇಕು. ಮೊದಲು ನಾವು ಮತದಾರರಾಗಬೇಕು, ಬಳಿಕ ಸಮಾಜದ ಇತರ ಅರ್ಹರನ್ನು ಮತದಾರರನ್ನಾಗಿ ಮಾಡುವ ಜವಾಬ್ದಾರಿಯನ್ನು ನಿರ್ವಹಿಸಬೇಕು. ಬಿಎಲ್‌ಎಗಳು ಮನೆಮನೆಗೆ ಭೇಟಿ ನೀಡಿ ನಮೂನೆಗಳನ್ನು ಜವಾಬ್ದಾರಿಯಿಂದ ಭರ್ತಿ ಮಾಡಿಸಬೇಕು” ಎಂದು ತಿಳಿಸಿದರು.


ಸಭೆಯಲ್ಲಿ ಪ್ರಸನ್ನ ಶೆಟ್ಟಿ ಅವರು ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸಾಯಿ ಗಾಂವಕರ್, ಜಿಲ್ಲಾ ಉಪಾಧ್ಯಕ್ಷ ರಾಮ ಮೊಗೇರ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಸತೀಶ ನಾಯ್ಕ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಜು ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ, ಮಹಿಳಾ ಬ್ಲಾಕ್ ಅಧ್ಯಕ್ಷೆ ನಯನಾ ನಾಯ್ಕ, ಯೂತ್ ಕಾಂಗ್ರೆಸ್ ಅಧ್ಯಕ್ಷ ಇಮಶಾದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸುರೇಶ ನಾಯ್ಕ ನಿರೂಪಿಸಿದರು.

About The Author

error: Content is protected !!