ಭಟ್ಕಳ: ತಾಲೂಕಿನ ಶಿರಾಲಿಯ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ಮಹಾಮಾಯೆ (ಎಂ.ಜಿ.ಎಂ.) ದೇವಸ್ಥಾನದಲ್ಲಿ ತಡರಾತ್ರಿ ಕಳ್ಳತನಕ್ಕೆ ಯತ್ನ ನಡೆದಿರುವ ಆಘಾತಕಾರಿ ಘಟನೆ ಸೋಮವಾರ ಮುಂಜಾನೆ ಬೆಳಕಿಗೆ ಬಂದಿದೆ. ದೇವಸ್ಥಾನದ ಜಾಗರೂಕ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳು ಹಾಗೂ ಅಮೂಲ್ಯ ವಸ್ತುಗಳು ಕಳವಾಗುವುದು ತಪ್ಪಿದೆ.

ಗ್ಯಾಸ್ ಕಟರ್ ಬಳಸಿ ದರೋಡೆಗೆ ಯತ್ನ:
ಜೂನ್ 29ರ ರಾತ್ರಿ ಸುಮಾರು 1:55ರ ಸುಮಾರಿಗೆ ದೇವಸ್ಥಾನದ ಆವರಣಕ್ಕೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು, ದೇವಸ್ಥಾನದ ಹಿಂಭಾಗದ ಕಬ್ಬಿಣದ ಬಾಗಿಲನ್ನು ಗ್ಯಾಸ್ ಕಟರ್ ಬಳಸಿ ಕತ್ತರಿಸಿ ಒಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಗ್ಯಾಸ್ ಕಟರ್ನ ಶಬ್ದ ಹಾಗೂ ಅನುಮಾನಾಸ್ಪದ ನಡವಳಿಕೆಯನ್ನು ಗಮನಿಸಿದ ದೇವಸ್ಥಾನದ ಕರ್ತವ್ಯ ನಿರತ ಸಿಬ್ಬಂದಿ ತಕ್ಷಣ ಎಚ್ಚೆತ್ತುಕೊಂಡು ಜೋರಾಗಿ ಕೂಗಿಕೊಂಡಿದ್ದಾರೆ. ಸಿಬ್ಬಂದಿಯ ಕೂಗಾಟದಿಂದ ಗಾಬರಿಗೊಂಡ ಕಳ್ಳರು ಕೃತ್ಯವನ್ನು ಅರ್ಧಕ್ಕೆ ಕೈಬಿಟ್ಟು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಪೊಲೀಸ್ ದೂರು ದಾಖಲು:
ದೇವಸ್ಥಾನದಲ್ಲಿದ್ದ ದೇವಿಯ ಪವಿತ್ರ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ಇತರೆ ಅಮೂಲ್ಯ ವಸ್ತುಗಳನ್ನು ಕಳವು ಮಾಡುವ ಉದ್ದೇಶದಿಂದಲೇ ಕಳ್ಳರು ಸ್ಕೆಚ್ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ದೇವಸ್ಥಾನದ ವ್ಯವಸ್ಥಾಪಕ ಹಾಗೂ ಶಿರಾಲಿಯ ಕೊಂಕಣಕೇರಿ ನಿವಾಸಿಯಾದ ಅಜಯ್ ಜಯಕರ ಪ್ರಭು ಅವರು ನೀಡಿದ ದೂರಿನ ಮೇರೆಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು, ದೇವಸ್ಥಾನದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ

More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ