August 24, 2026

ಮಾನವ ಕಳ್ಳಸಾಗಾಣಿಕೆ ತಡೆಗೆ ಸಾರ್ವಜನಿಕ ಜಾಗೃತಿ ಅಗತ್ಯ: ನ್ಯಾಯಾಧೀಶೆ ಅರ್ಪಿತಾ

ಭಟ್ಕಳ: ಮಾನವ ಕಳ್ಳಸಾಗಾಣಿಕೆಯು ಸಮಾಜಕ್ಕೆ ದೊಡ್ಡ ಸವಾಲಾಗಿದ್ದು, ಅದನ್ನು ಸಂಪೂರ್ಣವಾಗಿ ತಡೆಗಟ್ಟಲು ಸೂಕ್ತ ಕಾನೂನು ಅರಿವು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಹೆಚ್ಚುವರಿ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶೆ ಅರ್ಪಿತಾ ಉದ್ಘಾ ಹೇಳಿದರು.

ತಾಲೂಕು ಕಾನೂನು ಸೇವಾ ಸಮಿತಿ ಭಟ್ಕಳ, ವಕೀಲರ ಸಂಘ, ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜನತಾ ವಿದ್ಯಾಲಯ ಶಿರಾಲಿ ಇವರ ಸಂಯುಕ್ತ ಆಶ್ರಯದಲ್ಲಿ ಶಿರಾಲಿಯ ಜನತಾ ವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ‘ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಇದೇ ವೇಳೆ ಅವರು ಉಪಸ್ಥಿತರಿದ್ದವರಿಗೆ ಮಾನವ ಕಳ್ಳಸಾಗಾಣಿಕೆ ನಿರ್ಮೂಲನೆಯ ಪ್ರತಿಜ್ಞಾ ವಿಧಿ ಬೋಧಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವೇಂಕಟೇಶ ಮುರನಾಳ ಮಾತನಾಡಿ, “ಮಕ್ಕಳಲ್ಲಿ ಹೆಚ್ಚುತ್ತಿರುವ ಅತಿಯಾದ ಮೊಬೈಲ್ ಬಳಕೆ ಹಾಗೂ ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದಾಗಿ ಮಾನವ ಕಳ್ಳಸಾಗಾಣಿಕೆ ಸೇರಿದಂತೆ ಹಲವು ಅಪರಾಧಗಳಿಗೆ ಬಲಿಯಾಗುವ ಪ್ರಕರಣಗಳು ಹೆಚ್ಚುತ್ತಿವೆ. ಪೋಷಕರು, ಶಿಕ್ಷಕರು ಮತ್ತು ಸಮಾಜದ ಪ್ರತಿಯೊಬ್ಬರೂ ಜಂಟಿಯಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸಿ ಇಂತಹ ಅಪರಾಧಗಳನ್ನು ತಡೆಯಲು ಶ್ರಮಿಸಬೇಕು” ಎಂದು ಮನವಿ ಮಾಡಿದರು.

ಅಧ್ಯಕ್ಷತೆ ಹಾಗೂ ಉಪಸ್ಥಿತಿ:
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನತಾ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಹೆಗಡೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಟ್ಕಳ ವಕೀಲರ ಸಂಘದ ಅಧ್ಯಕ್ಷ ಈಶ್ವರ ಎಂ. ನಾಯ್ಕ, ಸಹಾಯಕ ಸರ್ಕಾರಿ ಅಭಿಯೋಜಕ ಶೇಖರ ಹರಿಕಾಂತ ಹಾಗೂ ಜನತಾ ವಿದ್ಯಾಲಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯೆ ಆಶಾ ಕಲ್ಮನೆ ಉಪಸ್ಥಿತರಿದ್ದರು.

About The Author

error: Content is protected !!