

ಹೊನ್ನಾವರ: ಯುವಶಕ್ತಿಯ ಜಾಗೃತಿ ಹಾಗೂ ಪಕ್ಷದ ಸಂಘಟನಾ ಬಲವರ್ಧನೆಯ ಉದ್ದೇಶದಿಂದ ಬಿಜೆಪಿ ಯುವಮೋರ್ಚಾ ಹೊನ್ನಾವರ ಘಟಕದ ವತಿಯಿಂದ ‘ಯುವ ಸಂಕಲ್ಪ’ ಕಾರ್ಯಕ್ರಮವನ್ನು ಬರುವ ಆಗಸ್ಟ್ 2 (ರವಿವಾರ) ರಂದು ಮಧ್ಯಾಹ್ನ 3:30ಕ್ಕೆ ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಂಗವಾಗಿ ಯುವಮೋರ್ಚಾ ಘಟಕದ ಸಂಘಟನಾ ಸಪ್ತಾಹಕ್ಕೆ ಅಧಿಕೃತ ಚಾಲನೆ ನೀಡಲಾಗುವುದು ಹಾಗೂ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧನೆ ನೆರವೇರಲಿದೆ.
ಈ ವಿಶೇಷ ಕಾರ್ಯಕ್ರಮವನ್ನು ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿ ಅವರು ಉದ್ಘಾಟಿಸಲಿದ್ದು, ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಮುಖ್ಯ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಪ್ರಮುಖ ನಾಯಕರ ಉಪಸ್ಥಿತಿ:
ಸಮಾರಂಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಎನ್. ಎಸ್. ಹೆಗಡೆ, ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮ್ ಕುಮಾರ್, ಮಂಡಲ ಅಧ್ಯಕ್ಷ ಯೋಗೀಶ್ ಮೇಸ್ತ ಹಾಗೂ ವಿವಿಧ ಮೋರ್ಚಾಗಳ ಪ್ರಮುಖ ಪದಾಧಿಕಾರಿಗಳು ಮತ್ತು ಮುಖಂಡರು ಭಾಗವಹಿಸಲಿದ್ದಾರೆ.
“ಯುವಶಕ್ತಿಯನ್ನು ಸಂಘಟಿಸಿ ಪಕ್ಷದ ಸಿದ್ಧಾಂತಗಳನ್ನು ಬಲಪಡಿಸುವ ಈ ಕಾರ್ಯಕ್ರಮಕ್ಕೆ ತಾಲೂಕಿನ ಯುವಕರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ‘ಯುವ ಸಂಕಲ್ಪ’ವನ್ನು ಯಶಸ್ವಿಗೊಳಿಸಬೇಕು,” ಎಂದು ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಿವಾನಂದ ಮರಾಠಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

About The Author




Gtf