August 24, 2026

ದೊಡ್ಡನಾಗಮಂಗಲದ ‘ಮುತ್ತಪ್ಪ ಕಾವಲು’ ನಿವಾಸಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಪುರಸಭೆಗೆ ಮನವಿ!

ಕುಡಿಯುವ ನೀರು, ರಸ್ತೆ ಹಾಗೂ ಒಳಚರಂಡಿ ಸೌಲಭ್ಯವಿಲ್ಲದೆ ನರಳುತ್ತಿರುವ 200ಕ್ಕೂ ಹೆಚ್ಚು ಬಡ ಕುಟುಂಬಗಳು

ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ‘ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಮಹಿಳಾ ಸಬಲೀಕರಣ ಸಮಿತಿ’

    ಬೆಂಗಳೂರು: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಂಪೇಗೌಡ ಲೇಔಟ್ ವ್ಯಾಪ್ತಿಯ ದೊಡ್ಡನಾಗಮಂಗಲ ಪ್ರದೇಶದ ‘ಮುತ್ತಪ್ಪ ಕಾವಲು’ ನಿವಾಸಿಗಳಿಗೆ ತಕ್ಷಣವೇ ಶುದ್ಧ ಕುಡಿಯುವ ನೀರು, ಒಳಚರಂಡಿ ಹಾಗೂ ರಸ್ತೆ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ ‘ಕರ್ನಾಟಕ ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡ ಮಹಿಳಾ ಸಬಲೀಕರಣ ಹೋರಾಟ ಸಮಿತಿ (ರಿ.)’ ವತಿಯಿಂದ ಕೋನಪ್ಪನ ಅಗ್ರಹಾರ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಅಧಿಕೃತ ಮನವಿ ಪತ್ರ ಸಲ್ಲಿಸಲಾಯಿತು.

    ಕಳೆದ ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ 200ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (SC/ST) ಬಡ ಕುಟುಂಬಗಳು ವಾಸಿಸುತ್ತಿದ್ದು, ಇಂದಿಗೂ ಕನಿಷ್ಠ ಮೂಲಭೂತ ಸೌಕರ್ಯಗಳೂ ಇಲ್ಲದೆ ತೀವ್ರ ದುಸ್ತರ ಜೀವನ ನಡೆಸುತ್ತಿದ್ದಾರೆ.

    ಪ್ರಮುಖ ಸಮಸ್ಯೆಗಳು ಹಾಗೂ ಬೇಡಿಕೆಗಳು:

    1. ಶುದ್ಧ ಕುಡಿಯುವ ನೀರಿನ ಅಭಾವ: ಪ್ರದೇಶದ ನಿವಾಸಿಗಳಿಗೆ ನಿಯಮಿತವಾಗಿ ಕುಡಿಯುವ ನೀರು ದೊರೆಯದೆ ಮಹಿಳೆಯರು ಹಾಗೂ ಮಕ್ಕಳು ನಿತ್ಯ ನೀರಿಗಾಗಿ ಪರದಾಡುವಂತಾಗಿದೆ. ಪ್ರತಿಯೊಂದು ಮನೆಗೂ ಶಾಶ್ವತ ನೀರಿನ ಸಂಪರ್ಕ ಕಲ್ಪಿಸಬೇಕು ಮತ್ತು ತಕ್ಷಣಕ್ಕೆ ಪರ್ಯಾಯವಾಗಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಬೇಕು.
    2. ಅಸಮರ್ಪಕ ಒಳಚರಂಡಿ ವ್ಯವಸ್ಥೆ: ಒಳಚರಂಡಿ (UGD) ವ್ಯವಸ್ಥೆ ಇಲ್ಲದಿರುವುದರಿಂದ ಕೊಳಚೆ ನೀರು ರಸ್ತೆಯಲ್ಲೇ ನಿಂತು ದುರ್ವಾಸನೆ ಬೀರುತ್ತಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ತಕ್ಷಣವೇ ಶಾಶ್ವತ ಚರಂಡಿ ನಿರ್ಮಿಸಿ ಶುಚಿತ್ವ ಕಾಪಾಡಬೇಕು.
    3. ಹದಗೆಟ್ಟ ರಸ್ತೆಗಳು: ರಸ್ತೆಗಳು ತೀರಾ ಹದಗೆಟ್ಟಿದ್ದು, ಮಳೆ ಬಂದಾಗ ಕೆಸರುಮಯವಾಗಿ ಶಾಲಾ ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ತುರ್ತು ಆಂಬ್ಯುಲೆನ್ಸ್ ಸಂಚಾರಕ್ಕೂ ತೊಂದರೆಯಾಗುತ್ತಿದೆ. ರಸ್ತೆಗಳನ್ನು ತಕ್ಷಣ ದುರಸ್ತಿಗೊಳಿಸಬೇಕು.

    ಉಗ್ರ ಹೋರಾಟದ ಎಚ್ಚರಿಕೆ:

    ಮನವಿ ಸಲ್ಲಿಸಿ ಮಾತನಾಡಿದ ಸಂಘಟನೆಯ ಪದಾಧಿಕಾರಿಗಳು, “ಆಡಳಿತಾಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿ, ಬಡ ನಿವಾಸಿಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಬೇಕು. ಒಂದು ವೇಳೆ ಈ ಮೂಲಭೂತ ಸೌಕರ್ಯಗಳ ಬೇಡಿಕೆಯನ್ನು ನಿರ್ಲಕ್ಷಿಸಿದಲ್ಲಿ, ಸಂವಿಧಾನಬದ್ಧವಾಗಿ ಹಾಗೂ ಕಾನೂನುಬದ್ಧವಾಗಿ ಉಗ್ರ ಹೋರಾಟ ಕೈಗೊಳ್ಳಲಾಗುವುದು,” ಎಂದು ಎಚ್ಚರಿಸಿದ್ದಾರೆ.

    ಈ ಸಂದರ್ಭದಲ್ಲಿ ಸಮಿತಿಯ ಸಂಸ್ಥಾಪಕ ರಾಜ್ಯ ಅಧ್ಯಕ್ಷರಾದ ಡಾ. ಭೀಮಪುತ್ರಿ ನಾಗಮ್ಮ, ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಶ್ರೀಮತಿ ಸುಜಾತ ಹಾಗೂ ಕೆಂಪೇಗೌಡ ಲೇಔಟ್ – ಮುತ್ತಪ್ಪ ಕಾವಲು ಪ್ರದೇಶದ ನೂರಾರು ನಿವಾಸಿಗಳು ಭಾಗವಹಿಸಿದ್ದರು.                                    ವರದಿ : ಮಹೇಶ ಶರ್ಮ

    About The Author

    error: Content is protected !!