ಕುಮಟಾ:ತಾಲ್ಲೂಕಿನ ಕುಮಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಫೆ. 15ರಂದು ಪಟ್ಟಣದ ಬಸ್ತಿಪೇಟೆ ಸಮೀಪದ ಮನೆಯೊಂದರಲ್ಲಿ, ಮನೆಯ ಸದಸ್ಯರು ನಿದ್ರಿಸುತ್ತಿದ್ದ ವೇಳೆ ಕಳ್ಳತನ ನಡೆದಿದೆ. ಕಿಟಕಿಯಿಂದ ಒಳಗೆ ಕೈ ಹಾಕಿ ಚಿಲಕದ ಕೊಂಡಿ ತೆಗೆಯುವ ಮೂಲಕ ಮನೆಯೊಳಗೆ ಪ್ರವೇಶಿಸಿದ ಕಳ್ಳ, ಕಪಾಟಿನಲ್ಲಿ ಇರಿಸಿದ್ದ ಸುಮಾರು ₹80 ಸಾವಿರ ನಗದು ಹಣವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದನು. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮನೆಯಲ್ಲೇ ಜನರಿದ್ದಾಗ ಕಳ್ಳತನ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ನಿರೀಕ್ಷಕ ಯೋಗೇಶ ಕೆ.ಎಂ. ಅವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ. ಮಯೂರ ಪಟ್ಟಣಶೆಟ್ಟಿ ಹಾಗೂ ಸಿಬ್ಬಂದಿಗಳ ತಂಡ ವಿಶೇಷ ತನಿಖೆ ಕೈಗೊಂಡು ತಾಂತ್ರಿಕ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿತು.
ತನಿಖೆಯ ವೇಳೆ ಸಿಕ್ಕ ಸುಳಿವಿನ ಆಧಾರದ ಮೇಲೆ ಸೊರಬ ತಾಲೂಕು, ಯಡಗೊಪ್ಪ ಗ್ರಾಮದ ನಿವಾಸಿ ಬಸವರಾಜ ಬಸ್ಯಾ ಶಿವಪ್ಪ ಗೌಡನನ್ನು ಬಂಧಿಸಲಾಗಿದೆ. ಆರೋಪಿಯಿಂದ ಕಳವು ಮಾಡಿದ್ದ ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ಶೀಘ್ರ ಪತ್ತೆಹಚ್ಚಿದ ಪೊಲೀಸ್ ತಂಡವನ್ನು ಜಿಲ್ಲಾ ಪೊಲೀಸ್ ಅಧಿಕಾರಿಗಳು ಅಭಿನಂದಿಸಿದ್ದು, ಪ್ರಕರಣದ ವೇಗವಾದ ಪತ್ತೆಯಿಂದ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.


More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ