March 1, 2026

ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ

ಭಟ್ಕಳ: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಮಾನತೆ, ಹಕ್ಕುಗಳು ಹಾಗೂ ಕಾನೂನು ಅರಿವು ಬೆಳೆಸುವ ಉದ್ದೇಶದಿಂದ ಚಿತ್ರಾಪುರದ ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ಮಂಗಳವಾರ ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಆಚರಿಸಲಾಯಿತು.
ತಾಲೂಕು ಕಾನೂನು ಸೇವಾ ಸಮಿತಿ ಭಟ್ಕಳ, ವಕೀಲರ ಸಂಘ ಭಟ್ಕಳ, ಅಭಿಯೋಜನೆ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಜರುಗಿತು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ಕಾಂತ ಕುರಣೆ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕ್ರಮದ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀವಲಿ ವಿದ್ಯಾ ಸಂಸ್ಥೆಯ ಶೈಕ್ಷಣಿಕ ಸಲಹೆಗಾರ ಡಾ. ರವೀಂದ್ರ ಆರ್. ಕಾಯ್ಕಿಣಿ ವಹಿಸಿ, ಸಾಮಾಜಿಕ ನ್ಯಾಯದ ತತ್ತ್ವಗಳು ಪುರಾತನ ಸಾಹಿತ್ಯದಲ್ಲಿಯೂ ಉಲ್ಲೇಖಿತವಾಗಿವೆ. ಸಮಾನತೆ ಮತ್ತು ನ್ಯಾಯ ಸಾಧನೆಗೆ ಶಿಕ್ಷಣವೇ ಬುನಾದಿ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ಈಶ್ವರ ಎಂ. ನಾಯ್ಕ ಹಾಗೂ ಉಪಾಧ್ಯಕ್ಷ ಆರ್. ಜಿ. ನಾಯ್ಕ ಉಪಸ್ಥಿತರಿದ್ದರು. ಸಹಾಯಕ ಸರಕಾರಿ ಅಭಿಯೋಜಕಿ ಪುಟ್ಟಲಕ್ಷ್ಮೀ ಹಾಗೂ ಸಹಾಯಕ ಸರಕಾರಿ ಅಭಿಯೋಜಕ ವಿವೇಕ ನಾಯ್ಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ಸಂಪನ್ಮೂಲ ವ್ಯಕ್ತಿಯಾಗಿ ವಕೀಲ ಎಂ. ಜೆ. ನಾಯ್ಕ ಮಾತನಾಡಿ, ಭಾರತೀಯ ಸಂವಿಧಾನದ ಚೌಕಟ್ಟಿನಲ್ಲಿ ಸಾಮಾಜಿಕ ನ್ಯಾಯದ ಮಹತ್ವವನ್ನು ವಿವರಿಸಿದರು. 2025ರಿಂದ ಆರಂಭಗೊಂಡ ಕಾಲೇಜು ಉತ್ತಮ ಶೈಕ್ಷಣಿಕ ಸೇವೆ ನೀಡುತ್ತಿರುವುದನ್ನು ಶ್ಲಾಘಿಸಿದರು.
ವಾಣಿಜ್ಯಶಾಸ್ತ್ರ ಉಪನ್ಯಾಸಕಿ ರೇಖಾ ಆರ್. ಎಂ. ಸ್ವಾಗತಿಸಿದರು. ಸಂಖ್ಯಾಶಾಸ್ತ್ರ ಉಪನ್ಯಾಸಕಿ ನಯನಾ ಖಾರ್ವಿ ವಂದನಾರ್ಪಣೆ ಸಲ್ಲಿಸಿದರು. ಇಂಗ್ಲಿಷ್ ವಿಭಾಗದ ರಮ್ಯಾ ಎಂ. ನಾಯ್ಕ ನಿರೂಪಿಸಿದರು. ಅರ್ಥಶಾಸ್ತ್ರ ಉಪನ್ಯಾಸಕರಾದ ಅಜಿತ್ ಕಾಮತ್ ಸ್ವಾಗತಿಸಿದರು.
ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಶ್ರೀವಲಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

About The Author

error: Content is protected !!