ಕೃಷ್ಣರಾಜ ಪೇಟೆ ; ಹೆಣ್ಣು ಮಕ್ಕಳು ಈ ರಾಷ್ಟ್ರದ ಶಕ್ತಿ.. ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ಹೆಣ್ಣು ಮಕ್ಕಳ ಪಾತ್ರವು ನಿರ್ಣಾಯಕವಾಗಿದೆ. ಕೆ.ಆರ್.ಪೇಟೆ ಜೆಎಂಎಫ್ಸಿ ಸಿವಿಲ್ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶ ಸುಧೀರ್ ಅಭಿಮತ.. ಪುರುಷರಿಗೆ ಸರಿ ಸಮಾನವಾಗಿ ಕೆಲಸ ಮಾಡುತ್ತಾ ಸುಭದ್ರ ರಾಷ್ಟ್ರದ ನಿರ್ಮಾಣಕ್ಕೆ ತಮ್ಮ ಅಮೂಲ್ಯವಾದ ಕೊಡುಗೆಯನ್ನು ನೀಡುತ್ತಿರುವ ಮಹಿಳೆಯರು ಈ ರಾಷ್ಟ್ರದ ಶಕ್ತಿಯಾಗಿದ್ದಾರೆ ಎಂದು ಕೆ.ಆರ್.ಪೇಟೆ ಜೆಎಂಎಫ್ಸಿ ಸಿವಿಲ್ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಸುಧೀರ್ ಹೇಳಿದರು. ಅವರು ಕೃಷ್ಣರಾಜಪೇಟೆ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ನ್ಯಾಯಾಲಯದ ಸಿಬ್ಬಂದಿಗಳು ಹಾಗೂ ವಕೀಲರಿಗೆ ಬಹುಮಾನ ವಿತರಿಸಿ, ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡಿರುವ ಇನ್ಸ್ಪೆಕ್ಟರ್ ಸುಮಾರಾಣಿ ಅವರನ್ನು ಸನ್ಮಾನಿಸಿ ಗೌರವಿಸಿ ಮಾತನಾಡಿದರು.
ನಾಗರೀಕ ಸಮಾಜದಲ್ಲಿ ಇಂದು ಹೆಣ್ಣು ಮಕ್ಕಳು ಪುರುಷರಿಗೆ ಸರಿ ಸಮಾನವಾಗಿ ಕೆಲಸ ಮಾಡುತ್ತ ಸುಭದ್ರವಾದ ಸದೃಢ ರಾಷ್ಟ್ರದ ನಿರ್ಮಾಣಕ್ಕೆ ತಮ್ಮ ಅಮೂಲ್ಯವಾದ ಕೊಡುಗೆಯನ್ನು ನೀಡುತ್ತಾ ಇಡೀ ಸಮಾಜವನ್ನೇ ಮುನ್ನಡೆಸುತ್ತಿದ್ದಾರೆ. ತೊಟ್ಟಿಲನ್ನು ತೂಗುವ ಕೈ ರಾಷ್ಟ್ರವನ್ನು ಆಳಬಲ್ಲದು ಎಂಬ ಹಿರಿಯರ ನಾಣ್ಣುಡಿಯನ್ನು ನಿಜ ಮಾಡಿ ತೋರಿಸಿರುವ ಮಹಿಳೆಯರು ಇಂದು ಸಮಾಜದ ಎಲ್ಲ ಸ್ತರಗಳಲ್ಲಿ ಕೆಲಸ ಮಾಡುತ್ತ ಹೆಣ್ಣು ಈ ರಾಷ್ಟ್ರದ ಶಕ್ತಿ ಎಂಬುದನ್ನು ಸಾಬೀತುಪಡಿಸಿ ತೋರಿಸಿದ್ದಾರೆ. ಮುಂದಿನ ದಿನಗಳಲ್ಲಿ ಪುರುಷರು, ಹೆಣ್ಣು ಮಕ್ಕಳನ್ನು ಮೀರಿಸಿ ನೌಕರಿ ಗಿಟ್ಟಿಸಿಕೊಳ್ಳುವುದು ಕಷ್ಟ ಸಾಧ್ಯವಾಗಲಿದೆ ಎಂದು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿದ ಅಪರ ಸಿವಿಲ್ ನ್ಯಾಯಾಧೀಶರಾದ ಪಾರ್ವತಿ ಮಾತನಾಡಿ ತಾಯಿಯಾಗಿ, ಮಡದಿಯಾಗಿ, ಸಹೋದರಿಯಾಗಿ, ಮಗಳಾಗಿ ತನ್ನ ಪಾಲಿನ ಕರ್ತವ್ಯವನ್ನು ಪ್ರಾಮಾಣಿಕವಾಗಿ ಮಾಡುವ ಹೆಣ್ಣು ಇಂದು ಸಮಾಜದಲ್ಲಿ ತಾನು ಹುಟ್ಟುವ ಹಕ್ಕನ್ನು ಪಡೆಯಲು ಆಂದೋಲನ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾವಂತ ಸಮುದಾಯದಿಂದಲೇ ಹೆಣ್ಣು ಮಗುವಿನ ಭ್ರೂಣ ಹತ್ಯೆಯಂತಹ ಸಮಾಜ ವಿದ್ರೋಹಿ ಈ ಕೆಲಸಗಳು ನಿರಂತರವಾಗಿ ನಡೆಯುತ್ತಿವೆ. ಪೋಷಕರು ತಮ್ಮ ಮಕ್ಕಳನ್ನು ಹೆಣ್ಣು ಗಂಡು ಎಂದು ಭೇದ ಭಾವ ಮಾಡದೆ ಇಬ್ಬರಿಗೂ ಸಮಾನವಾದ ಶಿಕ್ಷಣವನ್ನು ಕೊಡಿಸಿ ಸಾಧನೆ ಮಾಡುವಂತೆ ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.
ಕೆ.ಆರ್.ಪೇಟೆ ಪಟ್ಟಣದ ಜೆಎಂಎಫ್ ಸಿ ಅಪರ ಸಿವಿಲ್ ನ್ಯಾಯಾಧೀಶರಾದ ದೇವರಾಜು ಹಾಗೂ ಅರ್ಪಿತಾ ಮಾತನಾಡಿ ಹೆಣ್ಣು ಮಕ್ಕಳು ಶಿಕ್ಷಣದ ಜ್ಞಾನದ ಬೆಳಕಿನ ಶಕ್ತಿಯ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬಂದು ಸಾಧನೆ ಮಾಡಬೇಕು. ತಮ್ಮ ಜೀವನದಲ್ಲಿ ಎದುರಾಗುವ ಸಮಸ್ಯೆಗಳು ಹಾಗೂ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಗುರಿ ಮುಟ್ಟಲು ಪ್ರಾಮಾಣಿಕವಾದ ಪ್ರಯತ್ನ ಮಾಡಬೇಕು ಎಂದು ಕಿವಿಮಾತು ಹೇಳಿದರು. ಹಿರಿಯ ವಕೀಲರಾದ ಬಿ.ಎಲ್. ದೇವರಾಜು, ಎಸ್.ಸಿ.ವಿಜಯ್ ಕುಮಾರ್, ಎನ್.ಆರ್. ರವಿಶಂಕರ್, ಸಹಾಯಕ ಸರ್ಕಾರಿ ಅಭಿಯೋಜಕರಾದ ವೀಣಾ, ಕೆ.ಆರ್.ಪೇಟೆ ಆರಕ್ಷಕ ನಿರೀಕ್ಷಕರಾದ ಸುಮಾರಾಣಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನ್ಯಾಯಾಲಯದ ಸಿಬ್ಬಂದಿಗಳು ನ್ಯಾಯಾಧೀಶರು ವಕೀಲರು ಹಾಗೂ ಮಹಿಳಾ ಪೊಲೀಸರಿಗೆ ಆಯೋಜಿಸಿದ್ದ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಹಿರಿಯಶ್ರೇಣಿ ನ್ಯಾಯಾಧೀಶರಾದ ಸುಧೀರ್ ಬಹುಮಾನಗಳನ್ನು ವಿತರಿಸಿದರು. ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ, ಮಂಡ್ಯ.

More Stories
ಹೆಣ್ಣು ಮಕ್ಕಳು ತಮ್ಮಲ್ಲಿನ ವೃತ್ತಿ ಕೌಶಲ್ಯ ಸದ್ಭಳಕೆ ಮಾಡಿಕೊಂಡು ಗುಡಿಕೈಗಾರಿಕೆ ಸ್ಥಾಪಿಸಿ ಸಾಧನೆ ಮಾಡಿ. ಅಶ್ವಿನಿ ಕರೆ
ಏಳು ಕೋಟಿ ಮೈಲಾರಲಿಂಗೇಶ್ವರ ಸುಕ್ಷೇತ್ರದ ನಾಲ್ಕನೇ ವರ್ಷದ ಜಾತ್ರಾ ಮಹೋತ್ಸವ
ಬಡ ರೈತನ ಮಗ, ವಕೀಲ ಕಾಮನಹಳ್ಳಿ ಬೋರೇಗೌಡರ ಜೀವನ ಸಾಧನೆಗೆ ಗವಿಮಠ ಶ್ರೀಗಳ ಮೆಚ್ಚುಗೆ..