May 12, 2026

ಭಟ್ಕಳ ಸೋಡಿಗದ್ದೆ ಶ್ರೀ ಮಹಾಸತಿ ದೇವಸ್ಥಾನದ ನೂತನ ಶಿಲಾಮಯ ಕಟ್ಟಡಕ್ಕೆ ಮೇ 14ರಂದು ಶಿಲಾನ್ಯಾಸ

ಭಟ್ಕಳ: ತಾಲೂಕಿನ ಸೋಡಿಗದ್ದೆ ಸೋಡಿಗದ್ದೆ ಶ್ರೀ ಮಹಾಸತಿ ದೇವಸ್ಥಾನದ ನೂತನ ಶಿಲಾಮಯ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಮೇ 14ರಂದು ಬೆಳಿಗ್ಗೆ 10.10ಕ್ಕೆ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆಯಲಿದೆ ಎಂದು ಶ್ರೀ ಮಹಾಸತಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವಿದಾಸ ಮೊಗೇರ ತಿಳಿಸಿದರು.

ಗುರುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿ, ದೇವಸ್ಥಾನವನ್ನು ಭಕ್ತರ ಶ್ರದ್ಧಾ-ಭಕ್ತಿಯ ಕೇಂದ್ರವಾಗಿಸುವುದರ ಜೊತೆಗೆ ಪ್ರೇಕ್ಷಣೀಯ ಧಾರ್ಮಿಕ ತಾಣವನ್ನಾಗಿ ರೂಪಿಸುವ ಉದ್ದೇಶ ಹೊಂದಲಾಗಿದೆ ಎಂದರು. ನೂತನ ಯೋಜನೆಗಾಗಿ ಸರ್ಕಾರದಿಂದ ರೂ. 9.95 ಕೋಟಿ ಅನುದಾನ ಮಂಜೂರಾಗಿದ್ದು, ಈ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿಸುವ ಉದ್ದೇಶವೂ ಇದೆ ಎಂದು ಹೇಳಿದರು.

ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವರಾದ ಆರ್.ಎನ್. ನಾಯ್ಕ, ಶಿವಾನಂದ ನಾಯ್ಕ, ಮಾಜಿ ಶಾಸಕರಾದ ಜೆ.ಡಿ. ನಾಯ್ಕ, ಸುನೀಲ ಬಿ. ನಾಯ್ಕ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಸುಧಾ ತಳವಾರ, ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ ಸೇರಿದಂತೆ ಉಭಯ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ನಾಡಿನ ಶಕ್ತಿ ದೇವತೆಯ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ನಾಗರಾಜ ಇ.ಎಚ್, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ನಾಗರಾಜ್ ಎಸ್ ನಾಯ್ಕ, ಸೇರಿದಂತೆ ಎಂ.ಜಿ. ನಾಯ್ಕ, ಮೋಹನ ನಾಯ್ಕ, ಸತೀಶ ನಾಯ್ಕ, ಚೊಳರಾಜ ಮೊಗೇರ, ಸತೀಶ ಜೆ. ನಾಯ್ಕ, ಮಂಜುನಾಥ ನಾಯ್ಕ, ಡಿ.ಎಂ. ಮೊಗೇರ, ಅಣ್ಣಪ್ಪ ಮೊಗೇರ, ಚೆನ್ನಯ್ಯ ಮೊಗೇರ, ಚಂದ್ರು ಮೊಗೇರ ಮತ್ತಿತರರು ಉಪಸ್ಥಿತರಿದ್ದರು.

About The Author

error: Content is protected !!