May 28, 2026

ಮುರಿನಕಟ್ಟೆ ಪುನರ್‌ನಿರ್ಮಾಣಕ್ಕೆ ಆಗ್ರಹಿಸಿ ಮೇ 29ರಂದು ಬಿಜೆಪಿ ಪ್ರತಿಭಟನಾ ಮೆರವಣಿಗೆ

ಭಟ್ಕಳ: ಮುರಿನಕಟ್ಟೆ ಕಟ್ಟೆ ಧ್ವಂಸಗೊಳಿಸಿದ ಘಟನೆ ಖಂಡಿಸಿ ಹಾಗೂ ಪುನರ್‌ನಿರ್ಮಾಣಕ್ಕೆ ಆಗ್ರಹಿಸಿ ಮೇ 29ರಂದು ಭಟ್ಕಳದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್.ಎಸ್. ಹೆಗಡೆ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 24ರಂದು ಮುರಿನಕಟ್ಟೆ ಭಾಗದಲ್ಲಿ ಅಮ್ಮನವರ ಹರಕೆ ಹೊರೆ ಇಡುವ ಸ್ಥಳದಲ್ಲಿ ಹಿಂದೂ ಬಾಂಧವರು ಕಟ್ಟೆ ನಿರ್ಮಿಸಿದ್ದರು. ಶಿರಾಲಿಯಲ್ಲಿ ನಡೆದ ದುರ್ಘಟನೆಯ ಹಿನ್ನೆಲೆಯಲ್ಲಿ ಹಲವರು ಆಸ್ಪತ್ರೆಯಲ್ಲಿ ಇದ್ದ ಸಂದರ್ಭವನ್ನು ಬಳಸಿಕೊಂಡು ದೊಡ್ಡ ಸಂಖ್ಯೆಯಲ್ಲಿ ಬಂದವರು ಹೊಸದಾಗಿ ನಿರ್ಮಿಸಿದ್ದ ಕಟ್ಟೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಆರೋಪಿಸಿದರು. ಇದರಿಂದ ಹಿಂದೂ ಸಮಾಜದ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಹೇಳಿದರು. ಘಟನೆಗೆ ಸಂಬAಧಿಸಿದAತೆ ಪ್ರಕರಣ ದಾಖಲಾಗಿದ್ದರೂ ಪ್ರಮುಖ ಆರೋಪಿಗಳ ಬಂಧನವಾಗಿಲ್ಲ. ಬದಲಾಗಿ ನ್ಯಾಯ ಕೇಳಲು ಹೋದ ಹಿಂದೂ ಕಾರ್ಯಕರ್ತರು ಹಾಗೂ ಮುಖಂಡರ ಮೇಲೆಯೇ ಪ್ರಕರಣ ದಾಖಲಿಸಲಾಗಿದೆ. ಕಾರ್ಯಕರ್ತರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಮೇ 29ರಂದು ಬೆಳಿಗ್ಗೆ 10 ಗಂಟೆಗೆ ಭಟ್ಕಳ ಹಳೆ ಬಸ್ ನಿಲ್ದಾಣದ ಎದುರಿನ ಆಟೋರಿಕ್ಷಾ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ತಾಲೂಕು ಸೌಧದವರೆಗೆ ಸಾಗಲಿದೆ. ಬಳಿಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಈ ಪ್ರತಿಭಟನೆಯ ಮೂಲಕ ಮುರಿನಕಟ್ಟೆಯನ್ನು ಅದೇ ಸ್ಥಳದಲ್ಲಿ ಪುನರ್‌ನಿರ್ಮಿಸಬೇಕು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್ ಮಾಡಿ ಅಶಾಂತಿ ಉಂಟುಮಾಡಿದವರನ್ನು ಬಂಧಿಸಬೇಕು ಹಾಗೂ ಘಟನೆ ಹಿಂದಿರುವ ಪ್ರಮುಖ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗುವುದು ಎಂದರು. ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಆರ್. ಅಶೋಕ್, ರೂಪಾಲಿ ನಾಯ್ಕ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಜಿಲ್ಲೆಯ ಪ್ರಮುಖರು ಭಾಗವಹಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಶಿವಾನಂದ ನಾಯ್ಕ, ಮಾಜಿ ಶಾಸಕ ಸುನಿಲ್ ನಾಯ್ಕ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

About The Author

error: Content is protected !!